ಶಿವಮೊಗ್ಗ : ಅಲೆಮಾರಿ ಜನಾಂಗದವರ ಜೀವನಮಟ್ಟವನ್ನು ಸುಧಾರಿಸಲು ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಸತಿ, ಶಿಕ್ಷಣ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿರುವ ಜಾತಿ ಪ್ರಮಾಣಪತ್ರ ಮತ್ತು ಪೂರಕ ದಾಖಲೆಗಳನ್ನು ಸರಳೀಕರಿಸಿ ನೀಡುವಂತೆ ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದ್ದಾರೆ.
100 ಕೋಟಿ ಅನುದಾನ : 4 ವಸತಿ ನಿಲಯ ಘೋಷಣೆ :
ರಾಜ್ಯದಲ್ಲಿ ಸುಮಾರು 11 ಲಕ್ಷ ಅಲೆಮಾರಿ ಸಮುದಾಯದವರು ಇದ್ದು, ಅವರ ಅಭಿವೃದ್ಧಿಗಾಗಿ 2026ರ ಬಜೆಟ್ನಲ್ಲಿ ರೂ.100 ಕೋಟಿ ವಿಶೇಷ ಅನುದಾನ ಮೀಸಲಿಡಲಾಗಿದೆ. ಜೊತೆಗೆ ಮಕ್ಕಳ ಶಿಕ್ಷಣಕ್ಕಾಗಿ 4 ವಸತಿ ನಿಲಯಗಳನ್ನು ಸ್ಥಾಪಿಸುವ ಯೋಜನೆ ಘೋಷಿಸಲಾಗಿದೆ.
ಈಗಾಗಲೇ 21 ಜಿಲ್ಲೆಗಳ ಪ್ರವಾಸ ಕೈಗೊಂಡು ಅಲೆಮಾರಿ ಜನಾಂಗದವರ ನೈಜ ಸ್ಥಿತಿಯನ್ನು ಪರಿಶೀಲಿಸಲಾಗಿದೆ. ಟೆಂಟ್ ಮತ್ತು ಜೋಪಡಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಸ್ವತಃ ಭೇಟಿ ನೀಡಿ, ಅವರಿಗೆ ವಸತಿ, ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗುರುವಾರ ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜ್ಯದಲ್ಲಿ ಸುಮಾರು 11 ಲಕ್ಷ ಅಲೆಮಾರಿ ಸಮುದಾಯದವರು ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ 20,048 ಪರಿಶಿಷ್ಟ ಜಾತಿ ಮತ್ತು ೨,೭೨೮ ಪರಿಶಿಷ್ಟ ಪಂಗಡದ ಜನಸಂಖ್ಯೆ ಇದೆ. 2026ರ ಬಜೆಟ್ನಲ್ಲಿ ಈ ಸಮುದಾಯದ ಅಭಿವೃದ್ಧಿಗಾಗಿ ರೂ.100 ಕೋಟಿ ಅನುದಾನವನ್ನು ಮೀಸಲಿಡಲಾಗಿದ್ದು, ಮಕ್ಕಳ ಶಿಕ್ಷಣಕ್ಕಾಗಿ 4 ವಸತಿ ನಿಲಯಗಳನ್ನು ಘೋಷಿಸಲಾಗಿದೆ ಎಂದರು.
ವಸತಿ ಮತ್ತು ಹಕ್ಕುಪತ್ರ ವಿತರಣೆ ವೇಗ :
ವಸತಿರಹಿತ ಅಲೆಮಾರಿ ಜನಾಂಗದವರಿಗೆ 3200 ಮನೆಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ. ತೀರ್ಥಹಳ್ಳಿಯಲ್ಲಿ ಈಗಾಗಲೇ ವಸತಿ ಮಂಜೂರಾಗಿದ್ದು, ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ ನಡೆಯಲಿದೆ. ಜೊತೆಗೆ ಜಿಲ್ಲೆಯಲ್ಲಿ ವಸತಿ ಅಗತ್ಯವಿರುವವರ ಪಟ್ಟಿಯನ್ನು ಒಂದು ವಾರದೊಳಗೆ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.
ಜಿಲ್ಲೆಯ ಗೋಂದಿ ಚಟ್ನಹಳ್ಳಿ, ಕಲ್ಲಾಪುರ, ಮಲ್ಲಿಗೇನಹಳ್ಳಿ ಹಾಗೂ ನಗರದ ಎಂಆರ್ಎಸ್ ಭಾಗಗಳಲ್ಲಿ ವಾಸಿಸುವ ಸುಡುಗಾಡು ಸಿದ್ದ, ಹಂದಿಜೋಗಿ, ಗೋಸಂಗಿ, ಶಿಳ್ಳೇಕ್ಯಾತ, ಕೊರಚ ಸೇರಿದಂತೆ ಹಲವು ಅಲೆಮಾರಿ ಸಮುದಾಯಗಳ ಪ್ರದೇಶಗಳಿಗೆ ಭೇಟಿ ನೀಡಿ, ಶಾಶ್ವತ ವಸತಿ ಹಾಗೂ ನಿವೇಶನ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ, ಕಂದಾಯ, ಗ್ರಾಮೀಣಾಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಒಟ್ಟಾಗಿ ಈ ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿವೆ. ತೀರ್ಥಹಳ್ಳಿಯಲ್ಲಿ ವಾಸಿಸುವ ಕೆಲ ಕುಟುಂಬಗಳಿಗೆ ಈಗಾಗಲೇ ವಸತಿ ಮಂಜೂರಾಗಿದ್ದು, ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ ನಡೆಯಲಿದೆ ಎಂದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆಯೂ ವೇಗಗೊಳ್ಳಲಿದೆ. ಅಲೆಮಾರಿ ಜನಾಂಗದವರಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ದಾಖಲೆಗಳ ಕೊರತೆ ದೊಡ್ಡ ಅಡಚಣೆಯಾಗಿದ್ದು, ಆಧಾರ್ ಮತ್ತು ಜಾತಿ ಪ್ರಮಾಣಪತ್ರಗಳನ್ನು ನೀಡಲು ವಿಶೇಷ ಶಿಬಿರಗಳನ್ನು ಆಯೋಜಿಸಲು ಸೂಚಿಸಲಾಗಿದೆ ಎಂದರು.
ವಸತಿ ರಹಿತರಿಗೆ 3200 ಮನೆಗಳನ್ನು ನೀಡುವ ಯೋಜನೆ ಇದ್ದರೂ, ದಾಖಲೆಗಳ ಕೊರತೆಯಿಂದ ಬೇಡಿಕೆ ಕಡಿಮೆಯಾಗಿದೆ. ಆದ್ದರಿಂದ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿ ಅರ್ಹರಿಗೆ ಸೌಲಭ್ಯ ತಲುಪಿಸುವಂತೆ ಸೂಚಿಸಲಾಗಿದೆ. ಜೊತೆಗೆ, ವಸತಿ ರಹಿತರ ಪಟ್ಟಿಯನ್ನು ಒಂದು ವಾರದೊಳಗೆ ಸಿದ್ಧಪಡಿಸಲು ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದರು.
ಅಲೆಮಾರಿ ಜನಾಂಗದವರಿಗೆ ನಿಗಮದ ಸೌಲಭ್ಯಗಳ ಬಗ್ಗೆ ಅರಿವು ಕಡಿಮೆ ಇರುವುದರಿಂದ, ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ವಿಶೇಷ ಅನುದಾನ ನೀಡಲಾಗಿದೆ. ಈ ಮೂಲಕ ಸಮುದಾಯದ ಒಟ್ಟು ಅಭಿವೃದ್ಧಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದರು.
ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಇದ್ದರು.
